ಕಲಬುರಗಿ: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಕರ್ನಾಟಕ ಸರ್ಕಾರ (Karnataka Govt) ತೀರ್ಮಾನಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲಾ ಸಚಿವರು ಈ ತೀರ್ಮಾನಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದು, ಈ ಭಾಗದ ಅಭಿವೃದ್ಧಿ ಕುರಿತು ಸಮಗ್ರ ಚರ್ಚೆ ನಡೆಸುವ ಉದ್ದೇಶದಿಂದ ವಿಶೇಷ ಸಭೆ ನಡೆಯಲಿದೆ.
ಸಚಿವ ಪ್ರಿಯಾಂಕ್ ಖರ್ಗೆಯವರ ಮಾಧ್ಯಮ ಪ್ರಕಟಣೆಯ ಪ್ರಕಾರ, ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಸಂಬಂಧಿಸಿದ ವಿಷಯಗಳ ಮೇಲೆ ಚರ್ಚೆಗಳು ನಡೆಯಲಿದ್ದು, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗುವ ಸಾಧ್ಯತೆ ಇದೆ.
ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಭಿವೃದ್ಧಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಕಟಿಬದ್ಧವಾಗಿದ್ದು, ಈ ಭಾಗದ ಜನರು ಈ ಸಭೆಯಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ.