ಚೆನ್ನೈ: ತಮಿಳುನಾಡಿನ “ತಮಿಳಗ ವೆಟ್ರಿ ಕಳಗಂ” ಪಕ್ಷದ ನಾಯಕ ಮತ್ತು ನಟ ವಿಜಯ್ ನೀಟ್ ಪರೀಕ್ಷೆಯಿಂದ (NEET Exam) ತಮಿಳುನಾಡಿಗೆ ವಿನಾಯಿತಿ ನೀಡಬೇಕು. ವಿಜಯ್ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದಾಗ, ‘ದೇಶದ ಜನರು ‘ನೀಟ್’ ಪರೀಕ್ಷೆ ಬಗ್ಗೆ ನಂಬಿಕೆ ಕಳೆದುಕೊಂಡಿದ್ದಾರೆ. ಈ ಪರೀಕ್ಷೆ ವಿದ್ಯಾರ್ಥಿಗಳ ಮೇಲೆ ಅನವಶ್ಯಕ ಒತ್ತಡವನ್ನು ಸೃಷ್ಟಿಸುತ್ತಿದ್ದು, ಹಾಗಾಗಿ ಈ ಪರೀಕ್ಷೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ‘ನೀಟ್’ ಪರೀಕ್ಷೆಯಿಂದ ವಿನಾಯಿತಿ ಪಡೆಯುವುದು ಅನಿವಾರ್ಯ’ ಎಂದು ಹೇಳಿದರು.
ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾದ ‘ನೀಟ್’ ವಿರುದ್ಧದ ನಿರ್ಣಯವನ್ನು ವಿಜಯ್ ಹರ್ಷದಿಂದ ಸ್ವಾಗತಿಸಿದ್ದಾರೆ. ತಮಿಳುನಾಡಿನ ಜನರ ಅಭಿಪ್ರಾಯಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.
ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಸಿಗುವಂತೆ ಸಂವಿಧಾನದ ಕೆಲವು ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ವಿಜಯ್ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ನೀಟ್ನಿಂದ ವಿನಾಯಿತಿ ನೀಡುವ ಸಂಬಂಧ ಇತ್ತೀಚೆಗೆ ಮಸೂದೆಯನ್ನು ಅಂಗೀಕರಿಸಲಾಯಿತು. ಆದರೆ, ಈ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಆರ್.ಎನ್. ರವಿ ವಿಳಂಬ ಮಾಡುತ್ತಿದ್ದು, ಈ ಕಾರಣದಿಂದ ಡಿಎಂಕೆ ಇತ್ತೀಚೆಗೆ ಅವರ ವಿರುದ್ಧ ವಾಗ್ದಾಳಿ ನಡೆಸಿತ್ತು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಮಂತ್ರಿ ಮುಂದೆ ಈ ಬೇಡಿಕೆಯನ್ನು ಮಂಡಿಸಿದ್ದಾರೆ.